SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಸಿದ್ದರಾಮಯ್ಯ ಮತಾಂತರದ ರಾಯಭಾರಿ: ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರೆ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದಂತಹ ಜಾತಿಗಳನ್ನು ಅವರು ಸೃಷ್ಟಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸಿದ್ದರಾಮಯ್ಯ ಹುಟ್ಟುಹಾಕಿದ್ದಾರೆ. ಇಂತಹ ಜಾತಿ ಸಮೀಕ್ಷೆ ರದ್ದಾಗಲಿದೆ. ಈ ಸಮೀಕ್ಷೆ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಿ, ಹಿಂದೂಗಳನ್ನು ತುಳಿಯಲಾಗುತ್ತಿದೆ ಎಂದು ಹೇಳಿದರು. ಏನೇ ಮಾಡಿದರೂ ಸಂವಿಧಾನದ ಪ್ರಕಾರ ಮಾಡಲಿ. ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವಿದೆ. ಅದರ ಪ್ರಕಾರ ಕ್ರಮ ವಹಿಸಲಿ. ಸಿದ್ದರಾಮಯ್ಯ ಎಲ್ಲದರಲ್ಲೂ ಮುಸ್ಲಿಮ್ ಓಲೈಕೆ ಮಾಡುತ್ತಾರೆ. ಹಿಂದೂಗಳ ಮತ ಮಾತ್ರ ಬೇಕು. ಮತ ಸಿಕ್ಕ ನಂತರ ಹಿಂದೂ ಧರ್ಮದಲ್ಲಿ ಲೋಪವಿದೆ ಎಂದಿದ್ದಾರೆ ಎಂದು ಅಶೋಕ್ ತಿಳಿಸಿದರು. ಮುಸ್ಲಿಮರಲ್ಲಿ ಮಹಿಳೆಯರು ಮಸೀದಿಗೆ ಹೋಗುವಂತಿಲ್ಲ. ಇದು ಕೂಡ ತಪ್ಪೆಂದು ಅವರಿಗೆ ಅನ್ನಿಸಲಿಲ್ಲ. ಆದರೆ ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಕೇವಲ ಹಿಂದೂ ಧರ್ಮವನ್ನು ಟಾರ್ಗೆಟ್ ಮಾಡುವ ಬದಲು ಬೇರೆ ಧರ್ಮಗಳ ಬಗ್ಗೆ ಕೂಡ ಅವರು ಮಾತನಾಡಲಿ ಎಂದು ಅವರು ಹೇಳಿದರು. ದಸರಾ ಹಬ್ಬವನ್ನು ನಾಡಹಬ್ಬ, ಹಿಂದೂಗಳ ಹಬ್ಬ ಎನ್ನುತ್ತಾರೆ. ಅದೇ ರೀತಿ ಮುಸ್ಲಿಮ್ ಹಬ್ಬಗಳನ್ನು ಕೂಡ ನಾಡಹಬ್ಬ ಎನ್ನಲಿ ಮತ್ತು ಮುಸ್ಲಿಮ್ ಹಬ್ಬಗಳನ್ನು ಹಿಂದೂಗಳ ಕೈಯಲ್ಲಿ ಉದ್ಘಾಟನೆ ಮಾಡಿಸಲಿ. ದಸರಾ ಉದ್ಘಾಟನೆಯನ್ನು ಹಿಂದೂಗಳ ಕೈಯಲ್ಲಿ ಮಾಡಿಸಬೇಕಿತ್ತು ಎಂದು ಅಶೋಕ್ ತಿಳಿಸಿದರು. ಬೆಂಗಳೂರಿನಲ್ಲಿ 5 ಸಾವಿರ ಕೋಟಿ ರೂ. ಬಿಡುಗಡೆಯಾಗಿದ್ದರೂ ರಸ್ತೆ ದುರಸ್ತಿ ಮಾಡಿಲ್ಲ. ಶುದ್ಧ ಕುಡಿಯುವ ನೀರಿನ ಘಟಕದ 20 ಲೀಟರ್ ನೀರಿನ ದರವನ್ನು 5 ರಿಂದ 10 ರೂ. ಗೆ ಏರಿಸಲಾಗಿದೆ. ತೈಲ ದರ, ಹಾಲಿನ ದರ ಏರಿಕೆ, ಹೊಸದಾಗಿ ಕಸ ಶುಲ್ಕ ಹೇರಲಾಗಿದೆ. ಇನ್ನು ಗಾಳಿಗೂ ಶುಲ್ಕ ತಂದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬ್ರ್ಯಾಂಡ್ ಬೆಂಗಳೂರು ಸಾಕಾರವಾಗಲಿದೆ. 65-70 ಸಾವಿರ ಕೋಟಿ ರೂ.ನಷ್ಟು ಹೆಚ್ಚುವರಿ ತೆರಿಗೆಯನ್ನು ಹೇರಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಬಂದ ನಂತರ ಪಾಲಿಕೆಯನ್ನು ಐದು ಹೋಳು ಮಾಡಲಾಗಿದೆ. 198 ವಾರ್ಡ್‍ಗೆ ಶೇ.90ರಷ್ಟು ಇಂಜಿನಿಯರ್ ಇಲ್ಲ. ಪಾಲಿಕೆಯೆ ಪಾಪರ್ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‍ಗಳನ್ನು ಹೇಗೆ ನೇಮಿಸುತ್ತಾರೆ? ಒಂದು ಸಾವಿರಕ್ಕೂ ಅಧಿಕ ನೇಮಕಾತಿ ಮಾಡಿದರೆ ಹಣ ಎಲ್ಲಿಂದ ತರುತ್ತಾರೆ? ಬಹಳ ಕಡೆ ಶಂಕುಸ್ಥಾಪನೆಯಾಗಿ, ಕಾಮಗಾರಿ ಸ್ಥಗಿತವಾಗಿದೆ. ಇಂತಹ ಸ್ಥಿತಿಯಲ್ಲಿ ಆಡಳಿತ ನಡೆಯುವುದಿಲ್ಲ ಎಂದು ಅಶೋಕ್ ಹೇಳಿದರು. ವಯನಾಡಿನಲ್ಲಿ ಆನೆಯಿಂದ ಸತ್ತವರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಹಾಸನದಲ್ಲಿ ನಡೆದ ಘಟನೆಯಲ್ಲಿ ಸಂತ್ರಸ್ತರಿಗೆ ಮಾನವೀಯತೆ ಆಧಾರದಲ್ಲಿ ಹೆಚ್ಚು ಪರಿಹಾರ ನೀಡಬೇಕಿತ್ತು. ಸಿದ್ದರಾಮಯ್ಯನವರಿಗೆ ನಮ್ಮ ರಾಜ್ಯದ ಜನರ ಮೇಲೆ ಮಾನವೀಯತೆ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಆನೇಕಲ್‍ನಲ್ಲಿ ಫಲವತ್ತಾದ ಸಾವಿರಾರು ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ. ಬಿಡದಿ ನೀರಾವರಿ ಪ್ರದೇಶವಾಗಿದ್ದು, ಇಲ್ಲಿನ ಸ್ವಾಧೀನವನ್ನು ಹಿಂದಿನ ಸರಕಾರ ರದ್ದು ಮಾಡಿದೆ. ಆದರೆ ಈಗ ಮತ್ತೆ ಸ್ವಾಧೀನ ಮಾಡಲಾಗುತ್ತಿದೆ. ಕೆಂಗೇರಿ, ಯಲಹಂಕ ಸೇರಿದಂತೆ ರೈತರ 50 ಸಾವಿರ ಎಕರೆ ಜಮೀನನ್ನು ಸ್ವಾಧೀನ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಅಶೋಕ್ ದೂರಿದರು.

ವಾರ್ತಾ ಭಾರತಿ 15 Sep 2025 11:03 pm